ವಾಹನದಲ್ಲಿ ಜಾನುವಾರುಗಳ ಅಕ್ರಮ ಸಾಗಾಟ : ಇಬ್ಬರ ಬಂಧನ

ಸುಬ್ರಹ್ಮಣ್ಯದ ಕುಲ್ಕುಂದ-ಬಿಸ್ಲೆ ರಸ್ತೆಯ ಡಿಪೋ ಸಮೀಪ, ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಪ್ರಕರಣವೊಂದರಲ್ಲಿ ಸುಬ್ರಹ್ಮಣ್ಯ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಜೂನ್ 13ರಂದು KA-13 D 1923 ನೋಂದಣಿ ಸಂಖ್ಯೆಯ ಪಿಕಪ್ ವಾಹನವು ಆಯತಪ್ಪಿ ಬಿದ್ದ ಬಗ್ಗೆ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ತೆರಳಿ, ಅಲ್ಲಿ ಚಾಲಕ ಚಂದ್ರು ಅಲಿಯಾಸ್ ಚಂದ್ರಶೇಖರ (ಹಾಸನ ಜಿಲ್ಲೆಯ ಅರಕಲಗೂಡು ನಿವಾಸಿ) ಮತ್ತು ಕ್ಲೀನರ್ ಮೋಹನ್ ಅವರನ್ನು ವಿಚಾರಣೆಗೊಳಪಡಿಸಲಾಯಿತು.

ಯಾವುದೇ ಪರವಾನಗಿ ಇಲ್ಲದೆ, ಮಾಂಸ ಮಾರಾಟದ ಉದ್ದೇಶದಿಂದ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದುದು ಬೆಳಕಿಗೆ ಬಂದಿದೆ. ವಾಹನ ಅಪಘಾತಕ್ಕೀಡಾದಾಗ ಆರೋಪಿಗಳು ಜಾನುವಾರುಗಳನ್ನು ಇಳಿಸಿ ಓಡಿಸಿದ್ದರು, ನಂತರ ಪೊಲೀಸರು ಅವುಗಳನ್ನು ಪತ್ತೆ ಹಚ್ಚಿ ರಕ್ಷಿಸಿದ್ದಾರೆ.

ಪೊಲೀಸರು ಪಿಕಪ್ ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಂಡಿದ್ದು, ಆರೋಪಿಗಳ ವಿರುದ್ಧ ಕರ್ನಾಟಕ ಗೋವಂಶ ಹತ್ಯೆ ಪ್ರತಿಬಂಧಕ ಕಾಯ್ದೆ-2020, ಪ್ರಾಣಿ ಸಂರಕ್ಷಣಾ ಕಾಯ್ದೆ-1960 ಮತ್ತು ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.