ನಿವೃತ್ತ ಐಎಎಸ್ ಅಧಿಕಾರಿ ಎಲ್. ಕೆ. ಅತೀಕ್ ಅವರು ಸಿ. ಎಂ, ಡಿ. ಕೆ. ಶಿವಕುಮಾರ್ ಅವರ ಆರ್ಥಿಕ ಸಲಹೆಗಾರರಾಗಿ ನೇಮಕ.

ಬೆಂಗಳೂರು, ಜೂನ್ 4 : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆರ್ಥಿಕ ಸಲಹೆಗಾರರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಎಲ್. ಕೆ ಅತೀಕ್ ಅವರನ್ನು ನೇಮಕ ಮಾಡಲಾಗಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಅಧಿಕೃತ ಅಧಿಸೂಚನೆಯೊಂದನ್ನು ಹೊರಡಿಸಿದ್ದು, ಈ ಹೊಸ ಹುದ್ದೆಗೆ ಮುಖ್ಯ ಕಾರ್ಯದರ್ಶಿಗೆ ಸಮಾನವಾದ ವೇತನ ಮತ್ತು ಸೌಲಭ್ಯಗಳನ್ನು ನಿಗದಿಪಡಿಸಿದೆ. ಪ್ರಸ್ತುತ ಬೆಂಗಳೂರು ಬಿಸಿನೆಸ್ ಕಾರಿಡಾರ್ನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ 1991 ರ ಬ್ಯಾಚ್ನ ಐಎಎಸ್ ಅಧಿಕಾರಿ ಅತೀಕ್ ಅವರು, ಈ ಹೊಸ ಜವಾಬ್ದಾರಿಯನ್ನು ತಮ್ಮ ಪ್ರಸ್ತುತ ಹುದ್ದೆಯೊಂದಿಗೆ ಏಕಕಾಲದಲ್ಲಿ ನಿರ್ವಹಿಸಲಿದ್ದಾರೆ.
ಅತೀಕ್ ಅವರು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿವಿಧ ಉನ್ನತ ಹುದ್ದೆಗಳಲ್ಲಿ ಸುದೀರ್ಘ ಅನುಭವ ಹೊಂದಿದ್ದಾರೆ. ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಹಣಕಾಸು ಇಲಾಖೆ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದಾರೆ. ಪ್ರಧಾನ ಮಂತ್ರಿ ಕಾರ್ಯಾಲಯದಲ್ಲಿ (PMO) ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದು, ವಾಷಿಂಗ್ಟನ್ ಡಿಸಿಯ ವಿಶ್ವ ಬ್ಯಾಂಕ್ ಗುಂಪಿನ ಮಂಡಳಿಯಲ್ಲಿ ಭಾರತದ ಪ್ರತಿನಿಧಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಗ್ರಾಮೀಣಾಭಿವೃದ್ಧಿ, ಶಿಕ್ಷಣ, ಆರೋಗ್ಯ ಮತ್ತು ಆಡಳಿತ ಸುಧಾರಣಾ ಕ್ಷೇತ್ರಗಳಲ್ಲಿ ನಾಯಕತ್ವದ ಪಾತ್ರ ವಹಿಸಿದ್ದಾರೆ. ಅಲ್ಲದೆ, ಶಿಕ್ಷಣ, ಆರೋಗ್ಯ ಮತ್ತು ಆಹಾರ ಭದ್ರತೆಗೆ ಸಂಬಂಧಿಸಿದ ಅನೇಕ ಪ್ರಮುಖ ರಾಷ್ಟ್ರೀಯ ಉಪಕ್ರಮಗಳನ್ನು ರೂಪಿಸುವಲ್ಲಿ ಇವರ ಪಾತ್ರ ಹಿರಿದು.
ವಿವಿಧ ಸರ್ಕಾರಿ ನಿಗಮಗಳ ಮಂಡಳಿಯಲ್ಲಿ ಸದಸ್ಯರಾಗಿ ಮತ್ತು ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಅನುಭವ ಇವರಿಗಿದೆ.
